Kannada ಬೈಬಲ್
ಪ್ರಕಟನೆ ಒಟ್ಟು 22 ಅಧ್ಯಾಯಗಳು
ಪ್ರಕಟನೆ ಅಧ್ಯಾಯ 9
1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ *ಕೂಪ ನೋಡಿರಿ: ಪ್ರಕಟನೆ 20:1-3. ಹೋಗುವ ಬೀಗದ ಕೈ ಕೊಡಲ್ಪಟ್ಟಿತು.
2 ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.
ಪ್ರಕಟನೆ ಅಧ್ಯಾಯ 9
3 ನಂತರ ಮಿಡತೆಗಳು ಹೊಗೆಯೊಳಗಿಂದ ಭೂಮಿಯ ಮೇಲಕ್ಕೆ ಬಂದಿಳಿದವು. ಅವುಗಳಿಗೆ ಚೇಳುಗಳಂತೆ ಕುಟುಕುವ ಶಕ್ತಿಯನ್ನು ಕೊಡಲಾಯಿತು.
4 ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.
5 ಜನಗಳಿಗೆ ಐದು ತಿಂಗಳ ಕಾಲ ನೋವು ಉಂಟುಮಾಡುವಂತಹ ಶಕ್ತಿಯನ್ನು ಈ ಮಿಡತೆಗಳಿಗೆ ಕೊಡಲಾಯಿತು. ಆದರೆ ಜನರನ್ನು ಕೊಲ್ಲುವ ಶಕ್ತಿಯನ್ನು ಮಿಡತೆಗಳಿಗೆ ಕೊಡಲಿಲ್ಲ. ಈ ಮಿಡತೆಗಳು ಕುಟುಕಿದಾಗ ಚೇಳು ಕುಟುಕಿದಷ್ಟೇ ನೋವಾಗುತ್ತಿತ್ತು.
ಪ್ರಕಟನೆ ಅಧ್ಯಾಯ 9
6 ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.
7 ಮಿಡತೆಗಳು ಯುದ್ಧಕ್ಕೆ ಸಿದ್ಧಪಡಿಸಿದ ಕುದುರೆಗಳಂತೆ ಕಾಣುತ್ತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಎನೋ ಇದ್ದವು; ಅವುಗಳ ಮುಖಗಳು ಮಾನವರ ಮುಖಗಳಂತಿದ್ದವು.
8 ತಲೆಕೂದಲು ಸ್ತ್ರೀಯರ ತಲೆಕೂದಲಂತಿತ್ತು; ಹಲ್ಲುಗಳು ಸಿಂಹಗಳ ಹಲ್ಲುಗಳಂತಿದ್ದವು.
ಪ್ರಕಟನೆ ಅಧ್ಯಾಯ 9
9 ಎದೆಗಳು ಉಕ್ಕಿನ ಕವಚಗಳಂತೆ ಇದ್ದವು; ರೆಕ್ಕೆಗಳ ಶಬ್ದವು ಯುದ್ಧದಲ್ಲಿ ಆತುರದಿಂದ ಓಡುವ ಅನೇಕ ಕುದುರೆಗಳ ಮತ್ತು ರಥಗಳ ಶಬ್ದದಂತಿತ್ತು.
10 ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.
11 ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.
ಪ್ರಕಟನೆ ಅಧ್ಯಾಯ 9
12 ಮೊದಲನೆಯ ಮಹಾವಿಪತ್ತು ಕಳೆದುಹೋಯಿತು. ಇನ್ನೂ ಎರಡು ಮಹಾವಿಪತ್ತುಗಳು ಬರಲಿದ್ದವು.
ಆರನೇ ತುತೂರಿಯ ಪ್ರಾರಂಭ 13 ಆರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೇವರ ಸನ್ನಿಧಿಯಲ್ಲಿರುವ ಚಿನ್ನದ ಯಜ್ಞವೇದಿಕೆಯ ಮೇಲಿನ ಕೊಂಬುಗಳಿಂದ ಬರುತ್ತಿರುವ ಧ್ವನಿಯನ್ನು ನಾನು ಕೇಳಿದೆನು.
14 ಆ ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.
ಪ್ರಕಟನೆ ಅಧ್ಯಾಯ 9
15 ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.
16 ಅವರಲ್ಲಿದ್ದ ಅಶ್ವದಳದ ಸೈನಿಕರ ಸಂಖ್ಯೆ ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು.
17 ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.
ಪ್ರಕಟನೆ ಅಧ್ಯಾಯ 9
18 ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು.
19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ಜನರನ್ನು ಕಚ್ಚಬಲ್ಲ ಹೆಡೆಗಳುಳ್ಳ ಸರ್ಪಗಳಂತೆ ಇದ್ದವು.
20 ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
ಪ್ರಕಟನೆ ಅಧ್ಯಾಯ 9
21 ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.