1. ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿ ಬಿಡುವನು.
|
2. ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.
|
3. ಎಲ್ಲಾ ಜನರು ದೇಶದಿಂದ ಹೊರಕ್ಕೆ ಹಾಕಲ್ಪಡುವರು. ದೇಶದ ಸಂಪತ್ತನ್ನು ಕಿತ್ತುಕೊಳ್ಳಲಾಗುವದು. ಇದು ಯೆಹೋವನ ಆಜ್ಞೆಯಾಗಿರುವದರಿಂದ ನೆರವೇರುವದು.
|
4. ದೇಶವು ನಿರ್ಜನವಾಗಿ ಶೋಕಿಸುವದು. ಇಡೀ ಪ್ರಪಂಚವೇ ನಿರ್ಜನವಾಗಿ ಬಲಹೀನವಾಗುವದು. ಈ ಪ್ರಪಂಚದ ಪ್ರಸಿದ್ಧ ಜನರೂ ಬಲಹೀನರಾಗುವರು.
|
5. ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.
|
6. ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದುದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.
|
7. ದ್ರಾಕ್ಷೆಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ.
|
8. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್ವಾದ್ಯದ ಮತ್ತು ದಮ್ಮಡಿಗಳ ಶಬ್ದವು ನಿಂತಿದೆ.
|
10. ಈ ನಗರಕ್ಕೆ “ಪೂರ್ಣ ಗಲಿಬಿಲಿ” ಎಂಬುದೇ ತಕ್ಕ ಹೆಸರು. ನಗರವು ಕೆಡವಲ್ಪಟ್ಟಿತು. ಜನರು ಮನೆಗಳಿಗೆ ಪ್ರವೇಶಿಸಲಿಕ್ಕಾಗದು. ಕದಗಳನ್ನು ತೆರೆಯಲು ಸಾಧ್ಯವಾಗದು.
|
11. ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ. ದೇವರು ಇಸ್ರೇಲನ್ನು ಶಿಕ್ಷಿಸುವನು
|
13. ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು. ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು.
|
14. ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.
|
15. ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರ ಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.
|
16. ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿದೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿ ಮಾಡುವರು.”
|
17. ಈ ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ. ಅವರಿಗೆ ಭಯ, ಉರುಲು, ಗುಂಡಿಗಳು ಕಾದಿವೆ.
|
18. ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರ ಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.
|
20. ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.
|
21. ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯ ವಿಚಾರಣೆಮಾಡುವನು.
|
22. ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಕೆಲಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.
|
23. ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.
|